ನೇಗಿಲ ಯೋಗಿ



ನೇಗಿಲ ಹಿಡಿದಾ ಹೊಲದೊಳು ಹಾಡುತ 
     ಉಳುವಾ ಯೋಗಿಯ ನೋಡಲ್ಲಿ.
ಫಲವನು ಬಯಸದೆ ಸೇವೆಯೆ ಪೂಜೆಯು 
     ಕರ್ಮವೆ ಇಹ ಪರ ಸಾಧನವು.
ಕಷ್ಟದೊಳನ್ನವ ದುಡಿವನೆ ತ್ಯಾಗಿ 
     ಸೃಷ್ಟಿನಿಯಮದೊಳಗವನೇ ಭೋಗಿ.
ಲೋಕದೊಳೇನೇ ನಡೆಯುತಲಿರಲಿ 
     ತನ್ನೀ ಕಾರ್ಯವ ಬಿಡನೆಂದೂ:
ರಾಜ್ಯಗಳುದಿಸಲಿ ರಾಜ್ಯಗಳಳಿಯಲಿ, 
     ಹಾರಲಿ ಗದ್ದುಗೆ ಮಕುಟಗಳು,
ಮುತ್ತಿಗೆ ಹಾಕಲಿ ಸೈನಿಕರೆಲ್ಲ, 
      ಬಿತ್ತುಳುವುದನವ ಬಿಡುವುದೆ ಇಲ್ಲ.


ಬಾಳಿತು ನಮ್ಮೀ ನಾಗರಿಕತೆ ಸಿರಿ
     ಮಣ್ಣುಣಿ ನೆಗಿಲಿನಾಶ್ರಯದಿ;
ನೇಗಿಲ ಹಿಡಿದು ಕೈಯಾಧಾರದಿ
     ದೊರೆಗಳು ದರ್ಪದೊಳಾಳಿದರು.
ನೇಗಿಲ ಬಳದೊಳು ವೀರರು ಮೆರೆದರು,
     ಶಿಲ್ಪಿಗಳೆಸೆದರು, ಕವಿಗಳು ಬರೆದರು.   

ಯಾರು ಅರಿಯದ ನೇಗಿಲ ಯೋಗಿಯೆ 
     ಲೋಕಕೆ ಅನ್ನವನೀಯುವನು.
ಹೆಸರನು ಬಯಸದೆ ಅತಿಸುಖಕೆಳಸದೆ 
     ದುಡಿವನು ಗೌರವಕಾಶಿಸದೆ.
ನೇಗಿಲ ಕುಲದೊಳಗಡಗಿದೆ ಕರ್ಮ; 
      ನೇಗಿಲ ಮೇಲೆಯೆ ನಿಂತಿದೆ ಧರ್ಮ 


                                             - ಕುವೆಂಪು 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಉನ್ಮಾದದ ನಶೆ ನಮ್ಮೊಂದಿಗಿಷ್ಟು ಹಂಚಿಕೊಳ್ರಿ....