ಹೃದಯಸಮುದ್ರ

ಚಿತ್ರ ಕೃಪೆ: http://www.123rf.com/profile_srijanroyc

ಬಂಗಾರ ನೀರ ಕಡಲಾಚೆಗೀಚೆಗಿದೆ ನೀಲ ನೀಲ ತೀರಾ,
ಮಿಂಚುಬಳಗ ತೆರೆತೆರೆಗಳಾಗಿ ಅಲೆಯುವದು ಪುಟ್ಟಪೂರಾ,
ಅದು ನಮ್ಮ ಊರು, ಇದು ನಿಮ್ಮ ಊರು, ತಂತಮ್ಮ ಊರೊ ಧೀರಾ,
ಅದರೊಳಗೆ ನಾವು, ನಮ್ಮೊಳಗೆ ತಾವು ಅದು ಇಲ್ಲವಣ್ಣ ದೂರಾ.

ಕರೆ ಬಂದಿತಣ್ಣ, ತೆರೆ ಬಂದಿತಣ್ಣ, ನೆರೆ ಬಂದಿತಣ್ಣ ಬಳಿಗೆ,
ಹರಿತsದ ಭಾವ, ಬೆರಿತsದ ಜೀವ ಅದರೊಳಗೆ ಒಳಗೆ ಒಳಗೆ.
ಇದೆ ಸಮಯವಣ್ಣ ಇದೆ ಸಮಯ ತಮ್ಮ ನಮ್‌ನಿಮ್ಮ ಆತ್ಮಗಳಿಗೆ.
ಅಂಬಿಗನು ಬಂದ, ನಂಬಿಗನು ಬಂದ ಬಂದsದ ದಿವ್ಯಗಳಿಗೆ.

ಇದು ಉಪ್ಪು ನೀರ ಕಡಲಲ್ಲೊ; ನಮ್ಮ ಒಡಲಲ್ಲೆ ಇದರ ನೆಲೆಯು.
ಕಂಡವರಿಗಲ್ಲೊ ಕಂಡವರಿಗಷ್ಟೆ ತಿಳಿದsದ ಇದರ ಬೆಲೆಯು.
ಸಿಕ್ಕಲ್ಲಿ ಅಲ್ಲ ಸಿಕ್ಕಲೆ ಮಾತ್ರ ಒಡೆಯುವದು ಇದರ ಸೆಲೆಯು,
ಕಣ್ಣರಳಿದಾಗ ಕಣ್ ಹೊರಳಿದಾಗ ಹೊಳೆಯುವದು ಇದರ ಕಳೆಯು.

ಬಂದವರ ಬಳಿಗೆ ಬಂದsದ ಮತ್ತು ನಿಂದವರ ನೆರೆಗು
ಬಂದsದೋ ಬಂದsದ,
ನವಮನುವು ಬಂದ ಹೊಸ ದ್ವೀಪಗಳಿಗೆ ಹೊರಟಾನ ಬನ್ನಿ
ಅಂದsದೋ ಅಂದsದ.

                                                              - ದ ರಾ ಬೇಂದ್ರೆ 

ಕಾಮೆಂಟ್‌ಗಳಿಲ್ಲ:

ಕಾಮೆಂಟ್‌‌ ಪೋಸ್ಟ್‌ ಮಾಡಿ

ನಿಮ್ಮ ಉನ್ಮಾದದ ನಶೆ ನಮ್ಮೊಂದಿಗಿಷ್ಟು ಹಂಚಿಕೊಳ್ರಿ....